ವಿಷಯಕ್ಕೆ ಹೋಗಿ

ಬಾ ಮಳೆಯೆ ಬಾ....









ಮೂರುಸಂಜೆ ಸಮಯ. ಭೂಮಿಯನ್ನು ಅಪ್ಪಿ ತಬ್ಬಿಕೊಳ್ಳಲು ಮಳೆ ಹನಿಗಳು ಪೈಪೋಟಿಗೆ ಬಿದ್ದಂತೆ ತಾಮುಂದು ನಿಮುಂದು ಎಂದು ಧರಣಿಯ ಕೆನ್ನೆಗೆ ಮುತ್ತಿಕ್ಕುತ್ತವೆ. ಕಾದು ಸುಡುವ ಹಂಚಾಗಿದ್ದ ಭೂಮಿಗೆ ತಣ್ಣನೆಯ ಬಟ್ಟೆಯನ್ನು ಹೊದಿಸಿದ ಅನುಭವ. ಊರ ತುಂಬ ಪಸರಿಸಿದ ಮಣ್ಣ ಸುವಾಸನೆಗೆ ಪಾರಿಜಾತದ ಘಮವು ಸಪ್ಪೆಯಾಗಿದೆ.
ಯಾವ ಸೀಮೆಯ, ಯಾವ ಊರಿನ, ಯಾವ ಕೇರಿಯ ನೀರು ಆವಿಯಾಗಿ, ಹೆಪ್ಪುಗಟ್ಟಿ, ಮೋಡವಾಗಿ ಕರಗಿ ನೀರಾಗಿ ಪರಿಚಯವಿಲ್ಲದ ಜಾಗದಲ್ಲಿ ನಾಚಿಕೆ ಪಟ್ಟುಕೊಳ್ಳದೆ ಜಂಬವಿಲ್ಲದೆ ಸುರಿಯುವ ಅಮೃತಘಳಿಗೆಗೆ ಮಣ್ಣಿನೊಳಗೆ ಅಡಗಿ ಕುಳಿತ ಬೀಜ, ಸಸಿ, ಬೇರು ಬಾಯ್ತೆರೆದು ನಿಂತಿರುತ್ತದೆ ತುದಿಗಾಲ ಮೇಲೆ ಬೊಗಸೆಗಣನ್ನನ್ನು ಅರಳಿಸುತ್ತಾ.
ಅಲ್ಲೆಲ್ಲೂ ಅಣಬೆಗಳು ಹಿಡಿಮಳೆಗೆ ಭೂಮಿ ನೆನೆಯುವದನ್ನು ತಪ್ಪಿಸಲು ಕ್ಷಣಮಾತ್ರದಲ್ಲಿ ಹೂವಾಗಿ ಅರಳಿ ನಿಲ್ಲುತ್ತವೆ ಹಬ್ಬದ ಛತ್ರಿ ಚಾಮರ ಕಂಡಂತೆ. ಪುಟುಪುಟು ನೆಗೆಯುತ್ತಾ ಓಡಾಡುವ ಕಪ್ಪೆಮರಿಗಳ ಆಟ ಪುಟ್‍ಬಾಲ್ ಆಟ ನೋಡುವಷ್ಟೇ ಮಜಭೂತವಾಗಿರುತ್ತದೆ.
ದೇವರ ಆಟ ಬಲ್ಲವರ್ಯಾರು? ಹಸಿದು ಬರಗೆಟ್ಟ ಗಿಡಗಳು ಹಸಿರಾಗಲೂ ಜಡಿಮಳೆ ಬಸಿರಾಗುವಂತೆ ಮಾಡುತ್ತದೆ. ಎಲೆಯುದರಿ ಮುದುಡಿಕೊಂಡ ಗಿಡಗಳು ಮೆಲ್ಲನೆ ಮೈ ಕೊಡವಿಕೊಂಡು ಹಣ್ಣಾದ ಹಳದಿ ಎಲೆಗಳನ್ನು ಉದುರಿಸಿ ಚಿಗುರೆಲೆಗೆ ಜಾಗ ಮಾಡಿಕೊಡುತ್ತದೆ. ಮೆಲ್ಲಗೆ ಹೂವೊಂದು ಗರ್ಭದಿಂದ ಹೊರಬಂದು ನಗುತ್ತಾ ನಾಚಿ ನೀರಾಗುತ್ತದೆ ದುಂಬಿ ಬಂದು ಕುಳಿತಾಗ.
ಕೊಟ್ಟಿಗೆಯಲ್ಲಿ ಧೂಳು ಬಡಿದುಕೊಂಡ ನೇಗಿಲು, ಬಾರುಕೋಲು, ಕೆಲಸವಿಲ್ಲದೆ ಮಲಗಿದ್ದ ರಾಮ-ಲಕ್ಷ್ಮಣ ಹೆಸರಿನ ಎತ್ತುಗಳು ತಯಾರಾಗಿ ನಿಲ್ಲುತ್ತವೆ ಭೂಮಿಯ ಉದರಕ್ಕೆ ಕಾಳು ಹರಡಲು. ಕಾಳು ಬಸಿರೊಡೆದು ಸಸಿಯಾಗಲು ಜಡಿದು ಬರುವ ಮಳೆ ನೆರವಾಗಲು ಹವಣಿಸುತ್ತದೆ.
ಮಳೆ ಅಂದ್ರೆ ಎಲ್ಲರಿಗೂ ಇಷ್ಟ.
ನನಗೂ....
ಹೃದಯಕ್ಕೆ ಬರಗಾಲ ಬಿದ್ದ ಸಮಯದಲ್ಲಿ ಸುರಿದ ಸೊನೆಮಳೆಯೊಂದಿಗೆ ಮುನಿಸಿಕೊಳ್ಳುತ್ತಲೆ, ಅಪ್ಪಿಕೊಳ್ಳುತ್ತಾ, ಮುದ್ದಾಡುತ್ತಾ, ತನುಮನವನ್ನು ಅರ್ಪಿಸಿಕೊಳ್ಳಲು ತುದಿಗಾಲ ಮೇಲೆ ನಿಂತ ಸಮಯ. ನೋಡನೋಡುತ್ತಲೆ ಸುರಿದ ಮಳೆಗೆ ಮೈಯೊಡ್ಡಿ ಆಲಿಕಲ್ಲುಗಳನ್ನು ಬೊಗಸೆಗಟ್ಟಲೆ ಹೆಕ್ಕಿ ನನ್ನವಳಿಗೆ ಕೊಡುತ್ತಿದ್ದ ದಿನಗಳಿಗೆ ಕಾತರಿಸುತಿದ್ದ ಸಮಯದಲ್ಲಿ ಬಿರುಸಾಗಿ ಸುರಿದ ಮಳೆಯಲ್ಲಿ ಪುಟ್ಟಪೊರನಂತೆ ಅಲೆದಾಡಿ ಶೀತ,ಜ್ವರ ಬಂದು ಅಪ್ಪನ ಕೈಲಿ ಹೊಡೆಸಿಕೊಂಡ ಆ ದಿನಗಳು ನಿಜಕ್ಕೂ ಚಂದ.
ಹಿತ್ತಲ ಮನೆಯ ಬಾಗಿಲಿಂದ ತಪ್ಪಿಸಿಕೊಂಡು ‘ಬಾರೋ ಬಾರೋ ಮಳೆರಾಯ’ ಹಾಡನ್ನು ಗುನುಗುತ್ತಾ ನೆನೆದು ಒಬ್ಬರಿಗೊಬ್ಬರು ‘ಸಕ್ಕಸ್‍ಸುರಗಿ’ ಆಟವಾಡುವಾಗ ಶಾಲೆಯಲ್ಲಿ ಕೊಟ್ಟ ಹೋಂವರ್ಕ್, ಮನೆ ಯಾವುದು ನೆನಪಾಗುತ್ತಿರಲಿಲ್ಲ. ಎಲ್ಲಿಂದಲೋ ಬಂದ ಅವ್ವ ಬೆನ್ನಿಗೆ ಗುದ್ದಿದ ಮೇಲೆಯೇ ಮಳೆಯಾಟ ಬಂದ್...! ಅವತ್ತು ಮನೆಯಲ್ಲಿ ಬರೀ ಬೈಗುಳಗಳ ಮಳೆ..!
ಮೂಲೆ ಸೇರಿ ಏಕಾಂಗಿಯಾಗಿ ಬಸವಳಿದು ಬಿದ್ದ ಕೊಡೆಯೊಂದು ಹೂವಿನಂತೆ ಅರಳಿ ನಿಲ್ಲಲು ಮಳೆ ಬೇಕೆಬೇಕು. ಅಲ್ಲಲ್ಲಿ ತೂತುಬಿದ್ದು ಹಾಳಾಗಿದ್ದರೆ ಕೆಂಪು ಬಟ್ಟೆಯ ತುಣುಕಿನಿಂದ ಹೊಲಿಗೆ ಹಾಕಿದಾಗ ಮಧುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತದೆ. ಅಜ್ಜನ ಸಂಗಾತಿಯಾಗಿರುವ ಛತ್ರಿಯಂತೂ ದುರಸ್ತಿಯಿಂದ ಕೂಡಿ ಕೋಲಿನ ಕೆಲಸಕ್ಕೆ ರಾಜಿನಾಮೆ ನೀಡಲು ರೆಡಿಯಾಗುತ್ತದೆ. ತಲೆಗೊಂದರಂತೆ ಕೊಡೆ ಕೊಳ್ಳಲು ಚಿಕ್ಕಪ್ಪ ಶನಿವಾರದ ಸಂತೆಗೆ ಹಾಜರಾಗುತ್ತಾನೆ. ಸುರಿಯುವ ಮೊಂಡು ಮಳೆಯಲ್ಲಿ ಕೊಡೆ ಹಿಡಿದುಕೊಂಡು.
ಮಳೆಯ ಸಂಗಡ ಹರಿದು ಬಂದ ನೀರು ಹಳ್ಳದಲ್ಲಿ ಕೂಡಿ, ನದಿಯಾಗಿ, ಸಾಗರದಲ್ಲಿ ಲೀನವಾಗಿ ಆವಿಯಾಗಿ ಮತ್ತೆ ಭೂಮಿಗೆ ಬರಲು ತುದಿಗಾಲಿನಲ್ಲಿ ನಿಂತಿರುತ್ತದೆ.
ಮಳೆ ಯಾರಿಗೆ ಯಾಕೆ ಇಷ್ಟ :
ಚಿಕ್ಕಮಕ್ಕಳಿಗೆ :
 ಸುರಿಯುವ ಸೋನೆ ಮಳೆಯಲ್ಲಿ ನೆನೆಯುವ ಆಸೆ. ನೀಲಿ, ಕೆಂಪು, ಹಸಿರು ನಾನಾ ತರಹದ ಬಣ್ಣ ಬಣ್ಣದ ಹಾಳೆಗಳಿಂದ ಕಾಗದದ ದೋಣಿಗಳನ್ನು ತೇಲಿಬಿಡುವ ಆಸೆ. ಮನೆಯ ಮಾಳಿಗೆಯ ಕಿಂಡಿಯಲ್ಲಿ ಸುರಿಯುವ ರಭಸದ ನೀರಿಗೆ ಬರೀ ಬತ್ತಲೆಯಾಗಿ ಮೈಯೊಡ್ಡುವ ಆಸೆ. ಮೊಣಕಾಲವರೆಗೂ ನಿಂತ ನೀರಿನ ಜೊತೆ ಚಲ್ಲಾಟವಾಡುವ ಆಸೆ. ಮರಳಿನ ಮೇಲೆ ಗುಬ್ಬಿಗೂಡು ಕಟ್ಟಿ ಚಂದದ ಪುಟ್ಟ ಆಣೆಕಟ್ಟು ಕಟ್ಟಿ ಎಲ್ಲಿಂದಲೂ ಹಿಡಿದು ತಂದೆ ಮಳೆಹುಳುವಿನ ಮರಿ, ಕಪ್ಪೆಮರಿ ತಂದು ಕಣ್ಣರಳಿಸಿ ನೋಡುವ ಆಸೆ. ಇದ್ಯಾವುದಕ್ಕೂ ಬಿಡದೆ ಕಾಡಿಸುವ ಅಪ್ಪನ ಮೇಲೆ ಆಗಾಗ ಉಚಿತವಾಗಿ ಸಿಟ್ಟಾಗುವ ಆಸೆ ಸಂದರ್ಭ ಒದಗುತ್ತದೆ.

ಇನ್ನು ಪ್ರೇಮಿಗಳಿಗೆ :
ನಲ್ಲೆಯ ಕಿರುಬೆರಳನ್ನು ಹಿಡಿದು ಸಾಲುಮರದ ದಾರಿಗುಂಟ ಮೈಚಳಿ ಬಿಟ್ಟು ಒಬ್ಬರಿಗೊಬ್ಬರು ಅಂಟಿಕೊಂಡು ಅಪ್ಪಿಕೊಂಡು ಮುತ್ತಿನ ಮಳೆ ಸುರಿಸುವ ಆಟ ಇಷ್ಟ. ದಾರಿಯಲ್ಲಿ ಸಿಗುವ ಗುಲ್‍ಮೊಹರ್ ಗಿಡದ ಕೆಳಗೆ ಕುಳಿತು ಕಣ್ಣಿನಲ್ಲಿ ಕಣ್ಣುಸೇರಿಸಿ ಮೌನವಾಗಿ ನೋಡುವಾಗ ದಡಲ್ ಎಂದು ಬಂದಪ್ಪಳಿಸಿದ ಸಿಡಿಲಿನ ಸದ್ದಿಗೆ ಒಬ್ಬರಿಗೊಬ್ಬರು ಅಪ್ಪಿಕೊಂಡು ಕಡೆಗೆ ನಾಚಿಕೆಯಿಂದ ನಕ್ಕು ಸುಮ್ಮನಾಗುವ ಆಟ ಇಷ್ಟ. ಹಾದಿಗುಂಟ ನಡೆಯುವಾಗ ಕೆಂಪು ಬಣ್ಣದ ಕೊಡೆಯನ್ನು ತಿರುಗಿಸುತ್ತಾ ಹನಿಗಳ ಜೊತೆ ಚಲ್ಲಾಟವಾಡುವ ಆಟ ಇಷ್ಟ. ಮಳೆಯಿಂದ ನೆನೆದು ಚಳಿಯಾಗಿ ಬಿಸಿಯುಸಿರ ಬಯಕೆ ಕಟ್ಟೆಯೊಡೆಯುವ ಸಮಯದಲ್ಲಿ ಜಗದ ಪರಿವೆಯಿಲ್ಲದೆ ಒಂದಾಗುವ ಆಟದಲ್ಲಿ ದೂರದಲ್ಲೆಲ್ಲೂ ಅಣಕಿ ನೋಡುವ ಕಾಮನಬಿಲ್ಲನ್ನು ಮರೆತು ಬಣ್ಣಬಣ್ಣಗಳ ಭಾವದಲ್ಲಿ ಮಿಂದು ಬೆಚ್ಚಗಾಗುವ ಆಸೆ.

ದೊಡ್ಡವರಿಗೆ :
ಮಳೆಸುರಿಯುವಾಗ ಬಿಸಿಬಿಸಿ ಗರಿಗರಿ ಹಪ್ಪಳ,ಸಂಡಿಗೆ ಮಾಡಿ ಮಕ್ಕಳಿಗೆ ಉಣಬಡಿಸುವದಾಸೆ. ತುಟಿ ಸುಡುವ ಚಹಾ ಕುಡಿಯುವ ಆಸೆ. ಬಿಡದೆ ಧೋ ಎಂದು ಸುರಿಯುವ ಮಳೆಗೆ ಮನೆಯ ಹೆಂಚು ಸರಿಮಾಡಿಕೊಂಡು ಮನೆಯನ್ನು ಬೆಚ್ಚಗಾಗಿ ಇಡುವ ಕೆಲಸ. ಹಿತ್ತಲಿನಲ್ಲಿನ ಕಟ್ಟಿಗೆಗಳು ನೆನೆಯದಂತೆ ಇಡಲು ತೆಂಗಿನ ಗರಿಗಳನ್ನು ಜೋಡಿಸುವ ಎಡೆಬಿಡೆಯಿಲ್ಲದ ಕೆಲಸ. ಅಕ್ಕನಿಗಂತು ತನ್ನ ಜರತಾರಿ ಲಂಗಗಳನ್ನು ಒಣಗಿಸುವದು ಹೇಗೆ ಎಂಬ ಚಿಂತೆ ಕಾಡತೊಡುತ್ತದೆ.

 “ ಓ ಮಳೆಯೇ, ನನಗೊಂದು ಆಸೆ ಈಡೇರಿಸುವೆಯಾ...? ನಾನು ಏಕಾಂತದಲ್ಲಿರುವಾಗ ಸುರಿ. ನನ್ನವಳಿಲ್ಲದೆ ಬೇಜಾರಾಗಿ ಕುಳಿತ ಸಮಯದಲ್ಲಿ. ಮತ್ತೆ ನಿನ್ನೊಂದಿಗೆ ಆಟವಾಡುವ ಆಸೆಯಾಗಿದೆ. ಎಷ್ಟೆಂದರೆ ನಾನು ಮನೆ, ಪೋಲಿ ಗೆಳೆಯರ ಬಳಗ, ಕಾಡಿಸುವ ಅಕ್ಕ, ಜಗಳಗಂಟ ತಮ್ಮ, ಜಾತಿಗೀತಿ, ಕೆಲಸದ ಒತ್ತಡ, ದುಡ್ಡು, ಸ್ವಾರ್ಥ ಎಲ್ಲವನ್ನು ಬಿಟ್ಟು ಅಷ್ಟೇ ಅಲ್ಲ ಹೃದಯವನ್ನು ಚೂಟಿ ಮರೆಯಾಗುವ ಗೆಳತಿಯನ್ನು ಮರೆತು ನಿನ್ನೊಂದಿಗೆ, ಕೇವಲ ನಿನ್ನೊಂದಿಗೆ ಬರೀ ಮೈಯಲ್ಲಿ ಲೋಕದ ಯಾವ ಭವಬಂಧನಗಳ ಹಂಗಿಲ್ಲದೆ ಆಟವಾಡಬೇಕಾಗಿದೆ”
ಬಾ ಮಳೆಯೆ ಬಾ....
ಲೇಖನ : ಸಂಗಮೇಶ ಡಿಗ್ಗಿ ಸಂಗಾಮಿತ್ರ
8553550012

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಏಕಾಂಗಿಯೊಬ್ಬನ ದಾರಿಯ ಕವಲುಗಳು...

ಇಷ್ಟೂ ದೂರ ಸಾಗಿ ಬಂದರೂ ನಾನು ಇನ್ನು ಗುರಿ ಮುಟ್ಟೆ ಇಲ್ಲ ಎಂಬ ಕಠೋರ ಸತ್ಯ ಅರಿವಿಗೆ ಬರುವದು ಒಮ್ಮೆ ಕತ್ತು ತಿರುಗಿಸಿ ಹಿಂದೆ ನೋಡಿದಾಗ. ನಾವು ಅಂದುಕೊಂಡ ಕನಸು, ನಾವು ಕಟ್ಟಿಕೊಂಡ ಗುರಿಯನ್ನು ತಲುಪುವ ಹಾದಿಯಲ್ಲಿ ನೂರೆಂಟು ಕವಲುಗಳು, ತಗ್ಗುದಿನ್ನೆಗಳು ಹೆಡೆ ಬಿಚ್ಚಿ ಸ್ವಾಗತಿಸುತ್ತವೆ. ನಮ್ಮ ಮನಸಿನ ನಿರ್ಧಾರವನ್ನು ಕೇಳದೆ ಬೇರೆ ಯಾರದೋ ಮಾತಿಗೆ ನಮ್ಮ ಕನಸನ್ನು ಚಿವುಟಿ ಮತ್ತೊಬ್ಬರ ಕನಸಿಗೆ ಜೀತದಾಳಾಗಿ ದುಡಿಯುವ ಪರಿ ದಿಕ್ಕು ದೆಸೆಯಿಲ್ಲದೆ ಸುತ್ತುವ ದಿಕ್ಸೂಚಿಯಿಲ್ಲದ ಹಡಗಿನಂತಾಗುತ್ತದೆ. ನಾನು ಹೊಗುವ ದಾರಿ ನನಗೆ ಮಾತ್ರ ಸ್ಪಷ್ಟವಾಗಿ ಕಾಣುತ್ತದೆ ಹೊರತು ಬೇರೆ ಯಾರಿಗೂ ಅಲ್ಲ. ಅದು ಎಂದಿಗೂ ಕವಲೊಡೆದು ಅಪರಿಚಿತ ಊರಿಗೆ ಹೋಗುವದಿಲ್ಲ. ಅಂದುಕೊಂಡ ಗೂಡಿಗೆ ನಮ್ಮನ್ನು ಕರೆದೊಯ್ಯುತ್ತದೆ. ಅಲ್ಲಿ ನಮಗಾಗಿ ಸುಖ ಸಂತೋಷದ ನಿಧಿ ಕಾದು ಕೂತಿರುತ್ತದೆ. ನಾನು ಸಾಗುವ ಹಾದಿಯಲ್ಲಿ ಮುಳ್ಳಿದೆ ಅಂತ ಗೊತ್ತಿದ್ದರೂ ಅದು ನನಗೆ ಅಚ್ಚುಮೆಚ್ಚಿನ ಹಾದಿಯಾಗಿರುತ್ತದೆ. ಅಲ್ಲಿ ನನಗಾಗಿ ಹೂವು ಹಾಸಿಗೆ ಹಾಸಿರುತ್ತದೆ. ತಂಪು ತಂಗಾಳಿಯ ಜೊತೆ ನೆರಳು ನೀಡುತ್ತದೆ. ಅದಕ್ಕೆ ನಾನು ಮಾಡಬೇಕಾದದ್ದು ಇಷ್ಟೇ, ನನಗಾಗಿ ನಾನು ಬದುಕುವದು. ಇದು ಒಂತರಾ ಸ್ವಾರ್ಥ ಎನಿಸಿದರೂ ಪರರಿಗೋಸ್ಕರ ದಿನಗಟ್ಟಲೆ ವ್ಯಯಿಸುವ ನಾನು ನನಗೋಸ್ಕರ ಒಂದಷ್ಟು ಸಮಯ ಕೊಡುವದರಲ್ಲಿ ಏನು ತಪ್ಪಿದೆ..? ಅದೇ ಸಂತೆಯ ಪರಿಚಿತವಿರುವ ಮಂದಿಯ ನಡುವೆ ನಮ್ಮ ದಾರಿ ಸಿಕ್ಕು ದಿಕ್ಕಾಪಾಲಾಗಿ ದಡ

ಸೂರ್ಯಪುತ್ರರ ನೋವಿಗೆ ಇಲ್ಲಿದೆ ಪರಿಹಾರ

ಹರೆಯದ ವಯಸಲ್ಲಿ ಬೇಗನೆ ಏಳುವದು ಕಷ್ಟಕಣ್ರೀ. ಗಲ್ಲಿಗೇರಿಸುವ ಶಿಕ್ಷೆಯಾದ್ರೂ ಕೊಡಿ ಬೆಳಗ್ಗಿನ ಜಾವದಲ್ಲಿ ಏಳುವ ಕೆಲಸ ಹಚ್ಚಬೇಡಿ. ರಾತ್ರಿ ಮೂರರವರೆಗೆ ಸಿನಿಮಾ, ಮೇಸೆಜು, ವಾಟ್ಸಾಪ್ ಅಂತ ಟೈಮ್‍ತಿಂದು ಮುಸುಕು ಹೊದ್ದು ಮಲಗಿದಾಗ ಜಗದ ಪರಿವೆ ಇಲ್ಲದೆ ಲೋಕದ ಯಾವುದೇ ಚಿಂತೆ ಇಲ್ಲದವರಂಥೇ ನಿದ್ದೆ ಆವರಿಸಿರುತ್ತದೆ. ಬೆಳಗ್ಗೆ ಯಾರಾದ್ರೂ ಮುಸುಕು ಹೊದ್ದು ಮಲಗಿದವನನ್ನು  ಎಚ್ಚರಿಸಿದಾಗ ಎದುರಿನವರ ಕೆನ್ನೆಯ ಮೇಲೆ ಬಿಟ್ಟಿಯಾಗಿ ಬಾಸುಂಡೆ ಮೂಡಿಸುವಷ್ಟು ಸಿಟ್ಟು ಬರುತ್ತದೆ. ಅಲ್ರೀ ನೀವೆ ಹೇಳ್ರೀ... ಬೆಳಗ್ಗಿನ ಜಾವದಲ್ಲಿ ದೀಪಿಕಾ ಪಡುಕೋಣೆ ನಮ್ಮ ಜೊತೆ “ಚಾಟ್‍ಮಸಾಲ” ತಿನ್ನುವಾಗ ಯಾರಾದ್ರೂ ಡಿಸ್ಟರ್ಬ್ ಮಾಡಿದರೆ ನಿಮಗೂ ಸಿಟ್ಟು ಬರಲ್ವಾ..? ತಿಳಿನೀಲಿ ಕಂಗಳ ಹುಡುಗಿಯ ನೆನೆದು ಪೋಲಿ ಕನಸು ಕಾಣುತ್ತಾ ಅವಳ ಹತ್ತಿರ ಹೋಗಿ ಮುತ್ತನ್ನು ಕೊಡುವ ಸಮಯದಲ್ಲಿ ಮೈ ಮೇಲೆ ತಣ್ಣಿರು ಸುರಿದರೆ ಎಬ್ಬಿಸಿದವರನ್ನು ಜಾಡಿಸಿ ಒದೆಯುವಷ್ಟು ಸಿಟ್ಟು ಬರಲ್ವಾ..? ಬೆಳಗ್ಗೆ ಬೇಗ ಎದ್ದು ವ್ಯಾಯಾಮ ಮಾಡಿದ್ರೆ ಪರ್ಸನಾಲಿಟಿ ಚನ್ನಾಗಿ ಇರುತ್ತೆ ಅಂತ ಅದೇಷ್ಟೂ ಜನ ನಂಗೆ ತಲೆತಿನ್ನುತ್ತಿದ್ದರು. ನಾನೇನೊ ಜಾಂಗಿಗ್ ಮಾಡಲು ಆಸೆ. ಆದ್ರೆ ತಕರಾರು ಇರೋದು ನಸುಕಿನ ಜಾವ 5 ಗಂಟೆಗೆ ಏಳೋದು. ಸ್ವಾಮಿ ವಿವೇಕಾನಂದರು ನಮ್ಮಂತ ಸೂರ್ಯಪುತ್ರರಿಗೆ ದೇಶವನ್ನು ಮುನ್ನಡೆಯುವದಕ್ಕೊಸ್ಕರ  “ಏಳಿ ಎದ್ದೇಳಿ’ ಅಂತ ಸಿಂಹಘರ್ಜನೆ ಮಾಡಿದ್ದಾರೆ. ಎಷ್ಟು ಗಂಟೆಗೆ ಏಳಬೇಕು ಎಂದು ಹೇಳಿಲ್ಲ

ಚಂದಿರನಲ್ಲದೇ ನಿನಗೇನು ಕೊಡಲಿ ನಾನು..!

ಅವಳು, ಆಕೆ ಬಳಕಿದರೆ ಬಾತುಕೋಳಿಯ ಮೈಯವಳು, ದುಂಡುಮುಖ, ಗಿಣಿಯನ್ನು ನಾಚಿಸುವ ಮೂಗು, ಗಾಳಿ ಬೆಳಕನ್ನುಂಡು ಉಬ್ಬಿಕೊಂಡ ಗಲ್ಲಗಳು, ಅರಳಿ ನಿಶ್ಚಲವಾಗಿ ಕಾಡಿಸುವ ಮುಗ್ಧ ಕಣ್ಣುಗಳು, ಅಲ್ಲಲಿ ಇಳಿಬಿದ್ದಿರುವ ಮುಂಗುರುಳಿನವಳು, ಹೃದಯಕ್ಕೆ ಬೆಂಕಿ ಹಚ್ಚಿ ಮಾಯವಾಗುವ ಪ್ರೇಮಲೋಕದ ರಾಜಕುಮಾರಿಯಂತವಳು, ಬರಗಾಲ ಬಿದ್ದ ನೆಲಕ್ಕೆ ತಂಪೆರೆಯುವ ಮಳೆ ಸುರಿದವಳು, ಮಿನಾಕ್ಷೀ ಚೌಕ್‍ನ ಪ್ರತಿಯೊಂದು ಕಲ್ಲುಕಲ್ಲಿನಲ್ಲಿಯೂ ಕಾಣಿಸಿದವಳು, ಕಾಡಿಸಿದವಳು, ಹೃದಯಕ್ಕೆ ತೂತು ಕೊರೆದವಳು, ಕ್ಲಾಸ್‍ಲ್ಲಿ ಜುಮುಕಿಗಳನ್ನು ಅಲುಗಾಡಿಸುತ್ತಾ, ಕಾಲ್ಗೆಜ್ಜೆಯ ಸದ್ದುಮಾಡುತ್ತಾ ನಡೆದಾಡುವ ನವಿಲಿನಂತವಳು, ಅದಕ್ಕೂ ಮೀರಿ ಧಿಮಾಕಿನ ರಾಣಿಯ ವಂಶದವಳು. ಅವಳಿಗೆ ನಾನು ಪ್ರೀತಿಯಿಂದ ಆಂಬ್ಯುಲೆನ್ಸ್ ಎಂದು ಕರೆಯುತ್ತಿದ್ದೆ. ಅದಕ್ಕೂ ಒಂದು ಕಾರಣವಿದೆ. ಕೋಚಿಂಗ್‍ಗೆ ಬಿಜಾಪೂರಕ್ಕೆ ಬಂದಾಗ ಗೋಲಬುಂಬಜ್‍ದ ಹಾಗೆ ನನ್ನನ್ನು ಸೆಳೆದವಳು ಅವಳು. ನನ್ನ ಹೃದಯದ ಪ್ರತಿ ಕೋಣೆಯಲ್ಲಿಯೂ ಅವಳ ನೆನಪು ಪ್ರತಿದ್ವನಿಸುತ್ತಿದೆ ಒಂದಲ್ಲಾ ಎಳೇಳು ಸಾರಿ...! ಕ್ಲಾಸ್‍ಲ್ಲಿ ಪ್ಯಾನಿಗಾಗಿ ನಡೆದ ಜಿದ್ದಾಟದಲ್ಲಿ ಗೆದ್ದವಳು ನೀನಲ್ಲವೇ ನನ್ನವಳು. ಅವಳ ಗೆಲ್ಲುವ ಹಠಮಾರಿತನಕ್ಕೆ ಸೋತು ಹೋದ ಹುಚ್ಚು ಪೋರ ನಾನು. ಅವಳ ಒಂದು ನಗುವಿಗಾಗಿ, ವಾರೆಗಣ್ಣಿನ ನೋಟಕ್ಕಾಗಿ, ಕೈಬೆರುಳುಗಳ ಉಂಗುರಗಳ ದರ್ಶನಕ್ಕಾಗಿ, ಇತಿಹಾಸದ ಪೀರಿಯಡ್‍ಲ್ಲಿಯೂ ವಾಕರಿಕೆ ತರುವಷ್ಟು ಭವಿಷತ್‍ಕಾಲದ ಕನಸು ಕಾಣುತ್ತಿದ್ದವನು ನ